Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಗೆ ಭೇಟಿ; ಶ್ರೀ ಜಗದ್ಗುರು ವಿಶ್ವಾರಾಧ್ಯ ಗುರುಕುಲದ ಶತಮಾನೋತ್ಸವ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಭಾಗಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ವಾರಣಾಸಿಗೆ ಇಂದು ಭೇಟಿ ನೀಡಿದರು. ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಜಂಗಮವಾದಿ ಮಠದಲ್ಲಿ ಶ್ರೀ ಜಗದ್ಗುರು ವಿಶ್ವಾರಾಧ್ಯ ಗುರುಕುಲದ ಶತಮಾನೋತ್ಸವ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 19 ಭಾಷೆಗಳಿಗೆ ಅನುವಾದಿಸಿರುವ ಕೃತಿ ‘ಶ್ರೀ ಸಿದ್ಧಾಂತ ಶಿಖಾಮಣಿ ಗ್ರಂಥ’ ಬಿಡುಗಡೆ ಮಾಡಿದರು. ಅವರು, ‘‘ಶ್ರೀ ಸಿದ್ಧಾಂತ ಶಿಖಾಮಣಿ ಗ್ರಂಥ’ ಮೊಬೈಲ್ ಆಪ್ ಕೂಡ ಲೋಕಾರ್ಪಣೆಗೊಳಿಸಿದರು. ನಂತರ ಸಬಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಹೊಸ ದಶಕದ ಆರಂಭದಲ್ಲಿ ಶತಮಾನೋತ್ಸವ ಆಚರಣೆ ಕಾರ್ಯಕ್ರಮ ನಡೆಯುತ್ತಿರುವುದು ಕಾಕತಾಳೀಯ ಮತ್ತು ಈ ದಶಕ ಮತ್ತೊಮ್ಮೆ 21ನೇ ಶತಮಾನದಲ್ಲಿ ಭಾರತದ ಪಾತ್ರವನ್ನು ಜಗತ್ತಿಗೆ ಮನವರಿಕೆ ಮಾಡಿಕೊಡಲಿದೆ ಎಂದರು.

‘ಶ್ರೀ ಸಿದ್ಧಾಂತ ಶಿಖಾಮಣಿ ಗ್ರಂಥದ ಮೊಬೈಲ್ ಆಪ್ ಮೂಲಕ ಡಿಜಿಟಲೀಕರಣ ಮಾಡಿರುವುದು ಯುವಜನಾಂಗ ಮತ್ತಷ್ಟು ಬಲವರ್ಧನಯಾಗಲು ಮತ್ತು ಅವರುಗಳ ಜೀವನ ಸ್ಫೂರ್ತಿ ಪಡೆಯಲು ಸಹಾಯಕವಾಗಲಿದೆ ಎಂದು ಹೇಳಿದರು. ಗ್ರಂಥಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಮೊಬೈಲ್ ಆಪ್ ಮೂಲಕ ವಾರ್ಷಿಕ ಕ್ವಿಜ್ ಸ್ಪರ್ಧೆಗಳನ್ನು ನಡೆಸುವಂತೆ ಅವರು ಸಲಹೆ ಮಾಡಿದರು. ಗ್ರಂಥ 19 ಭಾಷೆಗಳಿಗೆ ಅನುವಾದಗೊಂಡಿರುವುದು ಇನ್ನಷ್ಟು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡುವಲ್ಲಿ ಸಹಾಯಕವಾಗಲಿದೆ ಎಂದರು.

ಪ್ರಧಾನಮಂತ್ರಿ ಅವರು, ‘ನಾಗರಿಕರಾಗಿ ನಮ್ಮ ನಡವಳಿಕೆ ಭಾರತದ ಭವಿಷ್ಯವನ್ನು ನಿರ್ಧರಿಸುತ್ತದೆ ಮತ್ತು ನವಭಾರತದ ದಿಕ್ಕನ್ನೂ ಕೂಡ ನಿರ್ಧರಿಸುತ್ತದೆ’ ಎಂದರು. ಅವರು ಸಂತರು ತೋರಿಸಿದ ಮಾರ್ಗವನ್ನು ಅನುಸರಿಸುವ ಮೂಲಕ ನಾವು ನಮ್ಮ ಜೀವನದ ಆಶೋತ್ತರಗಳನ್ನು ಈಡೇರಿಸಿಕೊಳ್ಳಬೇಕು ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಸಂಪೂರ್ಣ ಸಹಕಾರ ನೀಡುವುದನ್ನು ಮುಂದುವರಿಸಬೇಕು ಎಂದರು.

ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಜನರ ಕೊಡುಗೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ, ಸ್ವಚ್ಛತಾ ಯೋಜನೆಯನ್ನು ದೇಶದ ಪ್ರತಿಯೊಂದು ಮೂಲೆ ಮೂಲೆಗೂ ಕೊಂಡೊಯ್ಯಲಾಗಿದೆ ಎಂದರು. ಮೇಡ್ ಇನ್ ಇಂಡಿಯಾ – ಭಾರತದಲ್ಲೇ ತಯಾರಿಸಿದ ಉತ್ಪನ್ನಗಳ ಬಳಕೆಗೆ ಅವರು ಕರೆ ನೀಡಿದರು. ಅವರು, ಜಲಜೀವನ್ ಮಿಷನ್ ನಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ, ಅದನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.

ಪ್ರಧಾನಮಂತ್ರಿ ಅವರು, ಗಂಗಾನದಿ ಶುದ್ಧೀಕರಣ ಕಾರ್ಯದಲ್ಲಿ ಮಹತ್ವದ ಮತ್ತು ಗೋಚರಿಸುವಂತಹ ಸುಧಾರಣೆಗಳನ್ನು ತರಲಾಗಿದೆ, ಇದನ್ನು ಸಾಧಿಸಲು ಸಾಧ್ಯವಾಗಿರುವುದು ಸಾರ್ವಜನಿಕ ಸಹಭಾಗಿತ್ವದಿಂದಾಗಿ ಮಾತ್ರ ಎಂದರು. ನಮಾಮಿ ಗಂಗಾ ಕಾರ್ಯಕ್ರಮದಡಿ ಈವರೆಗೆ ಸುಮಾರು 7000 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳು ಪೂರ್ಣಗೊಂಡಿವೆ ಮತ್ತು ಸುಮಾರು 21 ಸಾವಿರ ಕೋಟಿ ರೂಪಾಯಿ ಯೋಜನೆಯ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಅವರು ಹೇಳಿದರು.

ಸರ್ಕಾರ ಇತ್ತೀಚೆಗಷ್ಟೆ ರಾಮಮಂದಿರ ನಿರ್ಮಾಣಕ್ಕಾಗಿ ‘ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ’ ಟ್ರಸ್ಟ್ ರಚನೆಯನ್ನು ಪ್ರಕಟಿಸಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಟ್ರಸ್ಟ್ ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣದ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲಿದೆ. ಟ್ರಸ್ಟ್ ಗೆ 67 ಎಕರೆ ಭೂಮಿಯನ್ನು ವರ್ಗಾವಣೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಅವರು ಹೇಳಿದರು.

**********